Friday, August 14, 2026
Homeರಾಜ್ಯಸಿದ್ಧಾರ್ಥ ವಿಹಾರ ಟ್ರಸ್ಟ್ ಜಮೀನು ಮಂಜೂರು ಹಗರಣ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಎನ್. ರವಿಕುಮಾರ್ ಆಗ್ರಹ

ಸಿದ್ಧಾರ್ಥ ವಿಹಾರ ಟ್ರಸ್ಟ್ ಜಮೀನು ಮಂಜೂರು ಹಗರಣ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಎನ್. ರವಿಕುಮಾರ್ ಆಗ್ರಹ

ಸಿದ್ಧಾರ್ಥ ವಿಹಾರ ಟ್ರಸ್ಟ್ ಜಮೀನು ಮಂಜೂರು ಹಗರಣ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಎನ್. ರವಿಕುಮಾರ್ ಆಗ್ರಹ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ‘ಸಿದ್ಧಾರ್ಥ ವಿಹಾರ ಟ್ರಸ್ಟ್’ಗೆ ಜಮೀನು ಮಂಜೂರಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮಗ್ರ ತನಿಖೆಗೆ ಆದೇಶಿಸಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಕಳಚಿಹಾಕಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನ್ಯಾಯಾಲಯದ ಈ ಆದೇಶವು ಕಾಂಗ್ರೆಸ್ ನಾಯಕರ ಕೌಟುಂಬಿಕ ಲೂಟಿಗೆ ಬಿದ್ದ ಬಲವಾದ ಪೆಟ್ಟು ಹಾಗೂ ಬಿಜೆಪಿ ನಡೆಸುತ್ತಿರುವ ನಿರಂತರ ಹೋರಾಟಕ್ಕೆ ಸಂದ ನೈತಿಕ ಜಯ ಎಂದು ಬಣ್ಣಿಸಿದ್ದಾರೆ.

ಖರ್ಗೆ ಕುಟುಂಬದ ವಿರುದ್ಧ ಗಂಭೀರ ಆರೋಪ
ದಲಿತರು, ಬಡವರು ಮತ್ತು ಅರ್ಹ ನೈಜ ಉದ್ಯಮಿಗಳಿಗೆ ಮೀಸಲಿದ್ದ ಕೆಐಎಡಿಬಿ (KIADB) ಯ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗ ಹಾಗೂ ಸರ್ಕಾರಿ ನಿವೇಶನಗಳನ್ನು ಖಾಸಗಿ ಟ್ರಸ್ಟ್ ಹೆಸರಿನಲ್ಲಿ ಲಪಟಾಯಿಸಲು ಖರ್ಗೆ ಕುಟುಂಬ ಷಡ್ಯಂತ್ರ ನಡೆಸಿತ್ತು ಎಂದು ರವಿಕುಮಾರ್ ಆರೋಪಿಸಿದ್ದಾರೆ.

ಹಗರಣದ ಬಲವಾದ ವಾಸನೆ ಹೊರಬರುತ್ತಿದ್ದಂತೆ ಜಮೀನನ್ನು ವಾಪಸ್ ನೀಡುವ ಮೂಲಕ ನಾಟಕವಾಡಲಾಗಿದೆ. “ಕಳ್ಳತನ ಮಾಡಿ ಸಿಕ್ಕಿಬಿದ್ದ ಮೇಲೆ ಕದ್ದ ಮಾಲನ್ನು ವಾಪಸ್ ಕೊಟ್ಟರೆ ಆತ ನಿರಪರಾಧಿಯಾಗುವುದಿಲ್ಲ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

  • ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯ: ಟ್ರಸ್ಟ್ ಹಗರಣದ ಕುರಿತು ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಪುಟದಲ್ಲಿ ಮುಂದುವರಿಯುವ ನೈತಿಕ ಹಕ್ಕು ಹೊಂದಿಲ್ಲ. ಸಾಕ್ಷ್ಯನಾಶ ತಡೆಯಲು ಅವರು ತಕ್ಷಣ ರಾಜೀನಾಮೆ ನೀಡಬೇಕು ಅಥವಾ ಮುಖ್ಯಮಂತ್ರಿಗಳು ಅವರನ್ನು ಸಂಪುಟದಿಂದ ಕೈಬಿಡಬೇಕು.
  • ಮಲ್ಲಿಕಾರ್ಜುನ ಖರ್ಗೆ ಮೌನವೇಕೆ?:

ರಾಷ್ಟ್ರಮಟ್ಟದಲ್ಲಿ ನೀತಿಪಾಠ ಮಾಡುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮದೇ ಮನೆಯಲ್ಲಿ ನಡೆದಿರುವ ಈ ಭೂ-ಹಗರಣದ ಬಗ್ಗೆ ರಾಜ್ಯದ ಜನತೆಗೆ ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

  • ನಿಷ್ಪಕ್ಷಪಾತ ತನಿಖೆಗೆ ಆಗ್ರಹ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತನಿಖೆಯನ್ನು ದಿಕ್ಕುತಪ್ಪಿಸುವ ಕುತಂತ್ರ ಮಾಡಬಾರದು. ಜಮೀನು ಮಂಜೂರಾದ ಪ್ರತಿಯೊಂದು ಕಡತವನ್ನೂ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ರವಿಕುಮಾರ್ ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಆಸ್ತಿಯನ್ನು ಕಬಳಿಸುವ ಪ್ರತಿಯೊಬ್ಬ ಭ್ರಷ್ಟರನ್ನೂ ಕಾನೂನಿನ ಕುಣಿಕೆಗೆ ತರುವವರೆಗೂ ವಿಧಾನಸೌಧದ ಒಳಗೆ ಮತ್ತು ಹೊರಗೆ ಉಗ್ರ ಹೋರಾಟ ಮುಂದುವರಿಯಲಿದೆ ಎಂದು ಎನ್. ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಹೆಚ್ಚಿನ ಸುದ್ದಿ