
ಬೆಂಗಳೂರು:
ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೆಲವರು ಅರಿವಿಲ್ಲದೆ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಬರಗಾಲ ಎಂಬುದು ಕೇವಲ ಒಂದು ಜಿಲ್ಲೆಗೆ ಸೀಮಿತವಾದ ಸಮಸ್ಯೆಯಲ್ಲ. ಎಲ್-ನಿನೊ ವೈಪರೀತ್ಯದ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಎಂಬುದನ್ನು ವೈಜ್ಞಾನಿಕವಾಗಿಯೇ ಹೇಳಲಾಗಿದೆ ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ರಾಜ್ಯ ಸರ್ಕಾರ ರೈತರಿಗೆ ನೀಡಬೇಕಾದ ಪರಿಹಾರವನ್ನು ನೀಡಲಿದೆ. ಆದರೆ ಈ ವಿಚಾರದಲ್ಲಿ ಅರಿವಿಲ್ಲದ ರಾಜಕೀಯ ಮಾಡುವವರು ಮೊದಲು ವಾಸ್ತವಾಂಶಗಳನ್ನು ತಿಳಿದುಕೊಳ್ಳುವ ಅಗತ್ಯವಿದೆ. ಸರ್ಕಾರ ರಾಜ್ಯದ ಜನತೆಗೆ ಒದಗಿಸುತ್ತಿರುವ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಹೇಳುವ ನೈತಿಕತೆ ಅವರಿಗೆ ಏನು ಎಂದು ಪ್ರಶ್ನಿಸಿದರು.

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಅರಿತುಕೊಂಡು ವೈಜ್ಞಾನಿಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಬಗ್ಗೆ ಸುಖಾಸುಮ್ಮನೆ ಸುಳ್ಳು ಮಾಹಿತಿಗಳನ್ನು ಹರಡುವುದನ್ನು ಮೊದಲು ನಿಲ್ಲಿಸಬೇಕು ಎಂದು ಅಪ್ಪಾಜಿ ನಾಡಗೌಡ ಆಗ್ರಹಿಸಿದರು.
