ಬೂದಿಹಾಳ–ಪೀರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಆಗ್ರಹ: ತಾಳಿಕೋಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ
ತಾಳಿಕೋಟಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೂದಿಹಾಳ–ಪೀರಾಪುರ ಏತ ನೀರಾವರಿ ಯೋಜನೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಹಾಗೂ ಯೋಜನೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಳಿಕೋಟಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು.
ತಾಳಿಕೋಟಿಯಲ್ಲಿ ಜಮಾಯಿಸಿದ ನೂರಾರು ರೈತರು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ಬೂದಿಹಾಳ–ಪೀರಾಪುರ ಏತ ನೀರಾವರಿ ಯೋಜನೆಯ ಫಲಾನುಭವಿಗಳಾದ ತಾಳಿಕೋಟಿ, ದೇವರ ಹಿಪ್ಪರಗಿ, ಸುರಪುರ ಹಾಗೂ ಹುಣಸಗಿ ತಾಲೂಕುಗಳ ರೈತರು ಈ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಪ್ರಮುಖ ಬೇಡಿಕೆಗಳು ಮತ್ತು ಆರೋಪಗಳು:
ಯೋಜನೆ ಪೂರ್ಣಗೊಳಿಸಿ:ಹಲವು ವರ್ಷಗಳಿಂದ ನೀರಾವರಿ ಸೌಲಭ್ಯಕ್ಕಾಗಿ ಕಾಯುತ್ತಿರುವ ರೈತರ ಭೂಮಿಗೆ ಕೂಡಲೇ ನೀರು ಹರಿಸಲು ಕಾಮಗಾರಿಯನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸಬೇಕು.
ಓಪನ್ ಕಾಲುವೆ ಪದ್ಧತಿ:ರೈತರಿಗೆ ಶಾಶ್ವತ ಅನುಕೂಲ ಕಲ್ಪಿಸುವ ದೃಷ್ಟಿಯಿಂದ, ಯೋಜನೆಯನ್ನು ಓಪನ್ ಕಾಲುವೆ (Open Canal) ಪದ್ಧತಿಯಲ್ಲಿಯೇ ಅನುಷ್ಠಾನಗೊಳಿಸಬೇಕು.
ಕಳಪೆ ಕಾಮಗಾರಿಯ ತನಿಖೆ: ರೈತರ ಜಮೀನುಗಳಲ್ಲಿ ಅಳವಡಿಸಿರುವ ವಾಲ್ ಬಾಕ್ಸ್ಗಳು ಹಾಗೂ ಮುಖ್ಯ ಪೈಪ್ಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಕುರಿತು ಉನ್ನತ ಮಟ್ಟದ ತಾಂತ್ರಿಕ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಲ್ ಪಾವತಿಗೆ ತಡೆ: ಕಾಮಗಾರಿಯಲ್ಲಿ ಅಕ್ರಮ ಮತ್ತು ಕರ್ತವ್ಯಲೋಪ ಎಸಗಿರುವ ಗುತ್ತಿಗೆದಾರರಿಗೆ, ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಬಿಲ್ ಪಾವತಿಸಬಾರದೆಂದು ಒತ್ತಾಯಿಸಲಾಯಿತು.
ಪ್ರತಿಭಟನೆಯ ನಂತರ, ರೈತ ಸಂಘಟನೆಗಳ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಳಿಕೋಟಿ ತಹಸೀಲ್ದಾರರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರು, ವಿವಿಧ ಗ್ರಾಮಗಳ ರೈತರು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು.
