ತುಮಕೂರು: ಬಿಜೆಪಿಯ ಮತ್ತೊಬ್ಬ ಬಂಡಾಯ ಅಭ್ಯರ್ಥಿ ಸೊಗಡು ಶಿವಣ್ಣ ಈ ಬಾರಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಹೊರಹಾಕಿದ್ದಾರೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿತರಾಗಿದ್ದ ಶಿವಣ್ಣ ಟಿಕೆಟ್ ಸಿಗದಿದ್ದಾಗ ಕೂಡಲೇ ರಾಜೀನಾಮೆಯನ್ನು ನೀಡಿ, ಜೆಡಿಎಸ್ ಬಾಗಿಲು ತಟ್ಟಿದ್ದರು. ಜೆಡಿಎಸ್ನಲ್ಲೂ ಸಹ ಟಿಕೆಟ್ ಸಿಗದೆ ಈಗ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಸತತ ನಾಲ್ಕು ಬಾರಿ ಶಾಸಕರಾಗಿ ಗೆದ್ದಿದ್ದ ಸೊಗಡು ಶಿವಣ್ಣ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಬದಲಿಗೆ ಹಾಲಿಶಾಸಕ ಜ್ಯೋತಿಗಣೇಶ್ ಅವರಿಗೆ ಮಣೆಹಾಕಿತ್ತು. ಇದರಿಂದ ಕೆರಳಿದ ಶಿವಣ್ಣ ಕೂಡಲೇ ರಾಜೀನಾಮೆ ಸಲ್ಲಿಸಿ, ಜೆಡಿಎಸ್ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಜೆಡಿಎಸ್ ಆಗಲೇ ಗೋವಿಂದರಾಜು ಅವರಿಗೆ ಟಿಕೆಟ್ ಘೋಷಿಸಿ ಅವರಾಗಲೇ ಪ್ರಚಾರ ಕಾರ್ಯವನ್ನೂ ಪ್ರಾರಂಭಿಸಿದ್ದರಿಂದ ಅಲ್ಲೂ ಟಿಕೆಟ್ ಲಭ್ಯವಾಗಿರಲಿಲ್ಲ. ಬಳಿಕ ಅಭಿಮಾನಿಗಳ, ಬೆಂಬಲಿಗರ ಜೊತೆ ಸಭೆ ನಡೆಸಿ ಅವರ ಅಭಿಪ್ರಾಯದಂತೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಸೊಗಡು ಶಿವಣ್ಣ ಹೇಳಿದ್ದಾರೆ.
