ಲಕ್ನೋ: ಮಾಜಿ ಸಂಸದ, ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ನನ್ನು ಶನಿವಾರ ಪ್ರಯಾಗ್ರಾಜ್ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉತ್ತರ ಪ್ರದೇಶದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಉಮೇಶ್ ಪಾಲ್ ಕೊಲೆ ಪ್ರಕರಣದ ಆರೋಪಿಗಳಾದ ಅತೀಕ್ ಹಾಗೂ ಅಶ್ರಫ್ನನ್ನು ಶನಿವಾರ ಪ್ರಯಾಗ್ರಾಜ್ ಆಸ್ಪತ್ರೆಗೆ ಮೆಡಿಕಲ್ ಚೆಕಪ್ಗೆಂದು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರಿಬ್ಬರ ಮೇಲೆ ಗುಂಡು ಹಾರಿಸಲಾಗಿದೆ. ಅತೀಕ್ ಹಾಗೂ ಅಶ್ರಫ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆಯೇ ಪತ್ರಕರ್ತರ ರೂಪದಲ್ಲಿ ಬಂದಿದ್ದ ಬಂದೂಕುಧಾರಿಗಳು ಅವರಿಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಘಟನೆಯ ಬಳಿಕ ಮಥುರಾ, ಅಯೋಧ್ಯೆ ಸೇರಿದಂತೆ ಉತ್ತರಪ್ರದೇಶದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಪ್ರಮುಖ ನಗರಗಳಲ್ಲಿ ಭದ್ರತಾ ಅಧಿಕಾರಿಗಳು ಗುಸ್ತು ತಿರುಗುತ್ತಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಭಾನುವಾರ ಎಲ್ಲಾ ಜಿಲ್ಲೆಗಳಲ್ಲಿ ಸಿಆರ್ಪಿಸಿಯ ಸೆಕ್ಷನ್ 144 ಅನ್ನು ವಿಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
