ಹುಬ್ಬಳ್ಳಿ: ಗುಜರಾತ್ ಮಾಡೆಲ್ ಅನುಸರಿಸಿ ಟಿಕೆಟ್ ಹಂಚಿರುವ ಬಿಜೆಪಿ ಕರ್ನಾಟಕದಲ್ಲೂ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಏಪ್ರಿಲ್ 11 ರಂದು ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದು, ಕಾಂಗ್ರೆಸ್ ಶಾಸಕರ ಪ್ರಾಬಲ್ಯವಿರುವ ಕುಂದಗೋಳ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಹುಬ್ಬಳಿ, ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ಬಿಜೆಪಿ ಹಾಲಿ ಶಾಸಕ ಅರವಿಂದ ಬೆಲ್ಲದ್, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಹಾಲಿ ಶಾಸಕ ಅಮೃತ ದೇಸಾಯಿ ಹಾಗೂ ನವಲಗುಂದ ಕ್ಷೇತ್ರಕ್ಕೆ ಹಾಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಹುಬ್ಬಳಿ, ಧಾರವಾಡ ಪೂರ್ವ ಮೀಸಲು ಕ್ಷೇತ್ರಕ್ಕೆ ಖ್ಯಾತ ನರರೋಗ ತಜ್ಞ ಡಾ.ಕ್ರಾಂತಿಕಿರಣ ಹಾಗೂ ಕುಂದಗೋಳ ಕ್ಷೇತ್ರಕ್ಕೆ ಎಂ.ಆರ್.ಪಾಟೀಲ ಅವರ ಹೆಸರು ಅಂತಿಮಗೊಳಿಸಿ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.
ಧಾರವಾಡ ಜಿಲ್ಲೆಯ ಒಟ್ಟು 7 ಕ್ಷೇತ್ರಗಳ ಪೈಕಿ ಐದು ಕ್ಷೇತ್ರದ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದು, ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರತಿನಿಧಿಸುವ ಸೆಂಟ್ರಲ್ ಹಾಗೂ ಕಲಘಟಗಿ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಳ್ಳಲಾಗಿದೆ. ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಿರುವ ಬಿಜೆಪಿ ಇಬ್ಬರು ಹಾಲಿ ಬಿಜೆಪಿ ಶಾಸಕರು ಆಯ್ಕೆಯಾಗಿರುವ ಹು-ಧಾ ಸೆಂಟ್ರಲ್ ಕ್ಷೇತ್ರ ಹಾಗೂ ಕಲಘಟಗಿ ಕ್ಷೇತ್ರದ ಅಭ್ಯರ್ಥಿ ಘೋಷಿಸದೇ ಕುತೂಹಲ ಉಳಿಸಿದೆ. ಇತ್ತೀಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾಗರಾಜ್ ಛಬ್ಬಿ ಕಲಘಟಗಿ ಕ್ಷೇತ್ರದ ಟಿಕೆಟ್ ಆಕಂಕ್ಷಿಯಾಗಿದ್ದಾರೆ
