ಮೊದಲ ಹಂತದ ಚುನಾವಣಾ ಅಭ್ಯರ್ಥಿಗಳ ಹೆಸರು ಘೋಷಿಸಲು ಕಾಂಗ್ರೆಸ್ ಸಜ್ಜಾಗಿದೆ. ಇಂದು ಬೆಳ್ಳಂಬೆಳಗ್ಗೆಯೇ ಅಭ್ಯರ್ಥಿಗಳ ಪಟ್ಟಿ ಹಿಡಿದು ದೆಹಲಿಗೆ ಹೊರಟಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಲಾದ ಪಟ್ಟಿಯೊಂದಿಗೆ ದೆಹಲಿಗೆ ಹೊರಟಿರುವ ಶಿವಕುಮಾರ್, ಪಕ್ಷದ ಮುಖಂಡರೊಂದಿಗೆ ಅಂತಿಮ ಹಂತದ ಚರ್ಚೆ ನಡೆಸಿ ಅಭ್ಯರ್ಥಿಗಳ ಹೆಸರು ಘೋಷಿಸಲಿದ್ದಾರೆ..
ಮೊದಲ ಹಂತದಲ್ಲಿ ಕಾಂಗ್ರೆಸ್, 98 ರಿಂದ 100 ಜನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಿದೆ. ಗೆಲುವಿನ ಮಾನದಂಡವನ್ನು ಮಾತ್ರ ಪರಿಗಣಿಸಿ ಈ ಬಾರಿ ಅಭ್ಯರ್ಥಿಗಳ ಆಯ್ಕೆ ನಡೆದಿದೆ ಎನ್ನಲಾಗುತ್ತಿದ್ದು ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ..
ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದ್ದು ಎಲ್ಲ ರಾಜಕೀಯ ಪಕ್ಷಗಳೂ ಗೆಲುವಿನ ತಂತ್ರಗಾರಿಕೆಯಲ್ಲಿ ತೊಡಗಿದೆ. ಕಳೆದ 2 ತಿಂಗಳುಗಳಿಂದ ನಿರಂತರವಾಗಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಇದೀಗ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಲು ಮುಂದಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಎಂ. ಬಿ.ಪಾಟೀಲ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಕಳೆದ ವಾರ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿತ್ತು. ಸಭೆಯಲ್ಲಿ ಅಂತಿಮ ಗೊಳಿಸಿದ ಅಭ್ಯರ್ಥಿಗಳ ಪಟ್ಟಿ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಕೆಯಾಗಿತ್ತು. ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು, ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತರವರಿಗೆ ಟಿಕೆಟ್, ಕಡಿಮೆ ಪೈಪೋಟಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮ ಹೀಗೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆದಿತ್ತು. ಸರಣಿ ಸಭೆಗಳ ನಂತರ ಯಾವುದೇ ಗೊಂದಲ ಇಲ್ಲದ ಕ್ಷೇತ್ರಗಳ ಪಟ್ಟಿ ಮಾಡಿ ಅಭ್ಯರ್ಥಿಗಳ ಹೆಸರಿಗೆ ಅಂತಿಮ ಮುದ್ರೆ ಒತ್ತಲಾಗಿದೆ
